‘ಮೋದಿಯವರಿಗೆ ವಿದೇಶ ಸುತ್ತಲು ಸಮಯವಿದೆ, ರಾಜ್ಯದ ನೆರೆಪೀಡಿತ ಪ್ರದೇಶ ವೀಕ್ಷಿಸಲು ಸಮಯವಿಲ್ಲ’
ಕೇಂದ್ರ ಸರ್ಕಾರ ತನ್ನ ಸರ್ವಾಧಿಕಾರಿ ಪ್ರಭಾವ ತೋರುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ಸರ್ಕಾರ ಭೇಟಿ ನೀಡುತ್ತಿಲ್ಲ. ರಾಜ್ಯದಲ್ಲಿ ಪ್ರವಾಹದಿಂದ 1 ಲಕ್ಷ ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ರಾಜ್ಯದ 25 ಜನ ಸಂಸದರೂ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಪ್ರಧಾನಿ ಮೋದಿಯವರಿಗೆ ವಿದೇಶ ಸುತ್ತಲು ಸಮಯವಿದೆ. ಆದರೆ ರಾಜ್ಯದ ನೆರೆಪೀಡಿತ ಪ್ರದೇಶ ವೀಕ್ಷಿಸಲು ಸಮಯವಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿರೋಧಿ ನೀತಿ ಅನುಸರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕಿಡಿ ಕಾರಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಸಾಕಿದ ಗಿಣಿಗಳೇ ಅವರನ್ನು ಕುಕ್ಕುತ್ತಿವೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ವಿ.ಎಸ್ ಉಗ್ರಪ್ಪ, ಅಧಿಕಾರದಲ್ಲಿ ಇದ್ದಾಗ ಏನೂ ಮಾತನಾಡದ ಎಚ್ ಡಿಕೆ ಅಧಿಕಾರದಿಂದ ಕೆಳಗಿಳಿದ ಕೂಡಲೇ ಹೀಗೆ ಮಾತನಾಡುತ್ತಿದ್ದಾರೆ. ಇದು ಅವರ ಮನಸ್ಥಿತಿ ಯಾವ ರೀತಿ ಇದೆ ಎಂಬುದನ್ನು ತೋರಿಸುತ್ತದೆ. ಉಪ ಚುನಾವಣೆಯನ್ನು ನಾವು ಸ್ವಾಗತಿಸುತ್ತೇವೆ. ಜೆಡಿಎಸ್ ಜತೆ ಮೈತ್ರಿ ಪ್ರಶ್ನೆಯೇ ಇಲ್ಲ. ಈಗಾಗಲೇ ನಮ್ಮ ಅಭ್ಯರ್ಥಿಗಳ ಆಯ್ಕೆ ನಡೆದಿದೆ, ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಿದ್ದೇವೆ. ಎಲ್ಲ 15 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದಿದ್ದಾರೆ.