ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಫಿಕ್ಸ್ : ಅನರ್ಹ ಶಾಸಕರಿಗೆ ಬಿಗ್ ಶಾಕ್
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಅನರ್ಹ ಶಾಸಕರಿಗೆ ದೊಡ್ಡ ಶಾಕ್ ನೀಡಿದಂತಾಗಿದೆ.
ಸೆಪ್ಟೆಂಬರ್ 23 ಕ್ಕೆ ಅಧಿಸೂಚನೆ ಹೊರಬೀಳಲಿದ್ದು, 15 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ದಿನದಲ್ಲಿ ಅಂದರೆ ಅಕ್ಟೋಬರ್ 21 ಕ್ಕೆ ಮತದಾನ ನಡೆಯಲಿದೆ. ಅಕ್ಟೋಬರ್ 24 ಕ್ಕೆ ಫಲಿತಾಂಶ ಹೊರ ಬೀಳಲಿದೆ.
ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ಇನ್ನೂ ಆರಂಭವಾಗದಿರುವ ಕಾರಣ ತಮ್ಮ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದ್ದು, ಆದರೆ ಚುನಾವಣಾ ಆಯೋಗ ಇದಕ್ಕೆ ಮಾನ್ಯತೆ ನೀಡಿಲ್ಲ.
ಎರಡು ಕ್ಷೇತ್ರಗಳ ಚುನಾವಣೆಗೆ ನ್ಯಾಯಾಲಯದ ತಡೆಯಾಜ್ಞೆ ಇರುವ ಕಾರಣ ಆ ಕ್ಷೇತ್ರಗಳ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ. ಆರ್.ಆರ್. ನಗರ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿಲ್ಲ. ಒಟ್ಟು 17 ಮಂದಿ ಶಾಸಕರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದು, ಅವರುಗಳ ವಿವರ ಇಂತಿದೆ.
ಗೋಕಾಕ್ ಕ್ಷೇತ್ರದ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ, ಅಥಣಿ ಕ್ಷೇತ್ರದ ಶಾಸಕರಾಗಿದ್ದ ಮಹೇಶ್ ಕುಮಟಳ್ಳಿ, ರಾಣೆಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್. ಶಂಕರ್, ಮಸ್ಕಿ ಕ್ಷೇತ್ರದ ಪ್ರತಾಪ್ ಗೌಡ ಪಾಟೀಲ್, ಯಶವಂತಪುರ ಕ್ಷೇತ್ರದ ಎಸ್.ಟಿ. ಸೋಮಶೇಖರ್, ಕೆ.ಆರ್. ಪುರ ಕ್ಷೇತ್ರದ ಬೈರತಿ ಬಸವರಾಜು, ಯಲ್ಲಾಪುರ ಕ್ಷೇತ್ರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಕ್ಷೇತ್ರದ ಬಿ.ಸಿ. ಪಾಟೀಲ್, ರಾಜರಾಜೇಶ್ವರಿ ನಗರ ಕ್ಷೇತ್ರದ ಮುನಿರತ್ನ, ಚಿಕ್ಕಬಳ್ಳಾಪುರ ಕ್ಷೇತ್ರದ ಡಾ. ಸುಧಾಕರ್, ಹೊಸಕೋಟೆ ಕ್ಷೇತ್ರದ ಎಂಟಿಬಿ ನಾಗರಾಜ್, ಹೊಸಪೇಟೆ-ವಿಜಯನಗರ ಕ್ಷೇತ್ರದ ಆನಂದ್ ಸಿಂಗ್ ಹಾಗೂ ಕಾಗವಾಡ ಕ್ಷೇತ್ರದ ಶ್ರೀಮಂತ ಪಾಟೀಲ್, ಮಹಾಲಕ್ಷ್ಮಿಲೇಔಟ್ ಕ್ಷೇತ್ರದ ಗೋಪಾಲಯ್ಯ, ಕೆ.ಆರ್. ಪೇಟೆ ಕ್ಷೇತ್ರದ ನಾರಾಯಣಗೌಡ ಹಾಗೂ ಹುಣಸೂರು ಕ್ಷೇತ್ರದ ಹೆಚ್. ವಿಶ್ವನಾಥ್ ರಾಜೀನಾಮೆ ನೀಡಿದ್ದರು.