ರೈತ ಹೋರಾಟ ಬೆಂಬಲಿಸಿ ಸಿಖ್ ಧರ್ಮಗುರು ಆತ್ಮಹತ್ಯೆ!
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಸಿಖ್ ಧರ್ಮಗುರು ಒಬ್ಬರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿ ಗಡಿಯಲ್ಲಿ ನಡೆದಿದೆ.
“ಸರ್ಕಾರದ ವಿರುದ್ಧ ಕೋಪ ಮತ್ತು ನೋವನ್ನು ವ್ಯಕ್ತಪಡಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡುತ್ತಿದ್ದೇನೆ” ಎಂದು ಅವರು ತಮ್ಮ ಆತ್ಮಹತ್ಯಾ ಟಿಪ್ಪಣಿಯಲ್ಲಿ ಬರೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶಿರೋಮಣಿ ಅಕಾಲಿ ದಳದ ಮುಖಂಡ ಸುಖ್ಬೀರ್ ಸಿಂಗ್ “ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿನ ರೈತರ ಸಂಕಟವನ್ನು ನೋಡುತ್ತಿದ್ದ ಸಂತ ಬಾಬಾ ರಾಮ್ ಸಿಂಗ್ ಜಿ ನಾನಕ್ಸರ್ ಸಿಂಗ್ರಾ ವಾಲೆ, ಸ್ವತಃ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಸಂತ ಜಿ ಅವರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಪರಿಸ್ಥಿತಿ ಹದಗೆಡುವ ಮುನ್ನ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆತ್ಮಹತ್ಯಾ ಟಿಪ್ಪಣಿಯಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದಿದ್ದಾರೆ.
ಇದನ್ನೂ ಓದಿ: ಕೇರಳ ಚುನಾವಣೆ: LDF & UDFಗೆ ಭರ್ಜರಿ ಗೆಲುವು; ಬಿಜೆಪಿಗೆ ಮುಖಭಂಗ!