Breaking News: ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ!
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ಭಿನ್ನಮತವನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರೀಂದರ್ ಅವರು ರಾಜೀನಾಮೆ ನೀಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ಧಾರೆ.
ಇಂದು (ಶನಿವಾರ) ಸಂಜೆ ಪಂಜಾಬ್ ಕಾಂಗ್ರೆಸ್ನ ಶಾಸಕಾಂಗ ಸಭೆ ನಡೆಯಲಿದೆ. ಅದಕ್ಕೂ ಮುನ್ನ, ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಂಜಾಬ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಮುಂದಿನ ವರ್ಷ ಪಂಜಾಬ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ, ಚುನಾವಣೆಗೂ ಮುನ್ನ ಪಂಜಾಬ್ನ ಕಾಂಗ್ರೆಸ್ ಘಟಕದಲ್ಲಿ ಎದುರಾಗಿರುವ ನಾಯಕತ್ವದ ವಿಚಾರದಲ್ಲಿ ಭಿನ್ನಮತವನ್ನು ಶಮನ ಮಾಡಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಇಂದು ಪಂಜಾಬ್ನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರುಗಳ ಸಭೆಯನ್ನು ನಡೆಯಲಿದೆ. ಸಭೆಯಲ್ಲಿ ಮುಂದಿನ ನಾಯಕರು ಯಾರು ಎಂದು ನಿರ್ಧಾರ ಮಾಡಲಾಗುವುದು ಎಂದು ಹೇಳಲಾಗಿದೆ.
ಪಂಜಾಬ್ನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ವಿರುದ್ದ ಪಕ್ಷದ ರಾಜ್ಯಾಧ್ಯಕ್ಷ ನವಜೋಧ್ ಸಿಂಗ್ ಸಿಧು, ನಾಲ್ಕು ಸಚಿವರುಗಳು ಹಾಗೂ ಸುಮಾರು ಹನ್ನೆರಡಕ್ಕೂ ಅಧಿಕ ಶಾಸಕರುಗಳು ಬಂಡಾಯ ಎದ್ದಿದ್ದರು. ಪಂಜಾಬ್ನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಬಗ್ಗೆ ಯಾವುದೇ ನಂಬಿಕೆ ನಮಗೆ ಇಲ್ಲ ಎಂದು ಇವರು ವಾದಿಸಿದ್ದರು. ಶಾಸಕರುಗಳು ಶಾಸಕಾಂಗ ಸಭೆ ನಡೆಸಿ, ನಾಯಕತ್ವ ಬದಲಿಸಬೇಕು ಎಂದು ಒತ್ತಡ ಹಾಕಿದ್ದರು.
ಈ ಎಲ್ಲಾ ಬೆಳವಣಿಗೆಯಿಂದಾಗಿ ಬೇಸತ್ತಿದ್ದ ಕಾಂಗ್ರೆಸ್ ಹೈಕಮಾಂಡ್ ಇಂದು ರಾಜೀನಾಮೆ ನೀಡುವಂತೆ ಅಮರೀಂದರ್ ಸಿಂಗ್ ಅವರಿಗೆ ಸೂಚನೆ ನೀಡಿತ್ತು. ಹೀಗಾಗಿ, ಸಿಎಂ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.
ಮೂಲಗಳ ಪ್ರಕಾರ ಮಾಜಿ ಪಿಸಿಸಿ (ಪಂಜಾಬ್ ಪ್ರದೇಶ ಕಾಂಗ್ರೆಸ್) ಅಧ್ಯಕ್ಷ ಸುನೀಲ್ ಜಖರ್ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
ಇದನ್ನೂ ಓದಿ: ರಾಜ್ಯಕ್ಕೆ ಸೇವಾ ತೆರಿಗೆ ಹಂಚಿಕೆ ಮಾಡದ ಕೇಂದ್ರ; ಹಣಕಾಸು ಆಯೋಗದ ಶಿಫಾರಸ್ಸಿಗೂ ಕಿಮ್ಮತ್ತಿಲ್ಲ!