ಟ್ವಿಟರ್ನಲ್ಲಿ ಅವಹೇಳನ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ದ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್!
ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ತಮ್ಮ ವಿರುದ್ದ ಟ್ವಿಟರ್ನಲ್ಲಿ ಅವಹೇಳನ ಮಾಡಿದ್ದಾರೆ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಆರೋಪಿಸಿದ್ದಾರೆ. ಅಲ್ಲದೆ, ಹೆಬ್ಬಾರ್ ವಿರುದ್ದ 1 ರೂ. ಮಾನನಷ್ಟ ಮೊಕದ್ದಮೆ ಹೂಡಿರುವ ಅವರು, ಬೇಷರತ್ತಾಗಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.
ಚೇತನ್ ಅವರು ದಾಖಲಿಸಿರುವ ಮಾನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಬೆಂಗಳೂರು ನ್ಯಾಯಾಲಯವು ಜೂನ್ 24ರಂದು ಸಚಿವರಿಗೆ ನೋಟಿಸ್ ನೀಡಿದೆ. ಅಲ್ಲದೆ, ಮುಂದಿನ ವಿಚಾರಣೆಯನ್ನು ಜುಲೈ 14ಕ್ಕೆ ನಿಗದಿಪಡಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ್ಯ ಮತ್ತು ಜಾತಿವಾದದ ವಿರುದ್ಧ ಪೋಸ್ಟ್ಗಳನ್ನು ಹಾಕಿದ್ದಕ್ಕಾಗಿ ನಟ ಚೇತನ್ ಕುಮಾರ್ ಅವರನ್ನು ಸಚಿವ ಶಿವರಾಮ್ ಹೆಬ್ಬಾರ್ ಟೀಕಿಸಿದ್ದರು. ಅಂಬೇಡ್ಕರ್ ಮತ್ತು ಪೆರಿಯಾರ್ ಹೇಳಿಕೆಗಳನ್ನು ಉಲ್ಲೇಖಿಸಿ ಪೋಸ್ಟ್ ಶೇರ್ ಮಾಡಿದ್ದರು.
ಜೂನ್ 11 ರಂದು ಸರಣಿ ಟ್ವೀಟ್ ಮಾಡಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ’ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದಿದ್ದರು.
ಇದನ್ನೂ ಓದಿ: ಸಿದ್ದರಾಮಯ್ಯಗೆ ಕ್ಷೇತ್ರ ಹುಡುವ ಪರಿಸ್ಥಿತಿ; ಮಾಜಿ ಸಿಎಂಗೆ ಇಂತಹ ಸ್ಥಿತಿ ಬರಬಾರದಿತ್ತು; ವಿಶ್ವನಾಥ್ ವ್ಯಂಗ್ಯ
ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು. ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿದ್ದರು.
’ಶಿವರಾಮ್ ಹೆಬ್ಬಾರ್ ಕಾಮೆಂಟ್ಗಳು ನಿಜವಲ್ಲ ಮತ್ತು‘ ನ್ಯಾಯಯುತ ಪ್ರತಿಕ್ರಿಯೆಗಳು ’ವ್ಯಾಪ್ತಿಗೆ ಬರುವುದಿಲ್ಲ. ಸಮಾಜದಲ್ಲಿ ಅರ್ಜಿದಾರರ ಪ್ರತಿಷ್ಠೆ, ವೈಯಕ್ತಿಕ ಮತ್ತು ವೃತ್ತಿಪರ ಖ್ಯಾತಿಯನ್ನು ಹಾಳು ಮಾಡುವ ಉದ್ದೇಶ ಹೊಂದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ತಮ್ಮ ವಿಡಿಯೋ ಮತ್ತು ಬರಹಗಳಲ್ಲಿ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಚೇತನ್ ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಎರಡು ಬಾರಿಯೂ ಸತತ ನಾಲ್ಕು ಗಂಟೆಗಳ ವಿಚಾರಣೆ ಎದುರಿಸಿದಾರೆ.
’ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು. ನಾನು ಮಾಡುತ್ತಿರುವ ಕೆಲಸದ ಬಗ್ಗೆ ಹೆಮ್ಮೆ ಇದ್ದು ಹೋರಾಟ ಮುಂದುವರೆಯುತ್ತದೆ ಎಂದು ನಟ ಚೇತನ್ ವಿಚಾರಣೆ ನಂತರ ಹೇಳಿಕೆ ನೀಡಿದ್ದರು.
ಇದನ್ನೂ ಓದಿ: ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ನಿರ್ಧರಿಸಿದ್ದು ಸತ್ಯ: ರಮೇಶ್ ಜಾರಕಿಹೊಳಿ