ಕನ್ನಡ ಭಾಷಾ ಅಭಿವೃದ್ಧಿಗಾಗಿ ಕನ್ನಡ ಕಾಯಕ ವರ್ಷ ಆಚರಣೆ: ಸಿಎಂ ಯಡಿಯೂರಪ್ಪ
‘ಕನ್ನಡ ಭಾಷೆಯ ಬಳಕೆ ನವೆಂಬರ್ಗಷ್ಟೇ ಸೀಮಿತವಾಗದೆ ವರ್ಷಪೂರ್ತಿ ಆಚರಿಸುವಂತಾಗಬೇಕು. ಬದಲಾದ ಕಾಲಘಟ್ಟದಲ್ಲಿ ಕನ್ನಡವನ್ನು ತಂತ್ರಜ್ಞಾನದ ಭಾಷೆಯನ್ನಾಗಿಸಬೇಕಿದೆ. ಹಾಗಾಗಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ನವೆಂಬರ್ 01 (ಇಂದು)ರಿಂದ 2021ರ ಅಕ್ಟೋಬರ್ 01ರ ವರಗೆ ‘ಕನ್ನಡ ಕಾಯಕ ವರ್ಷ’ವನ್ನಾಗಿ ಆಚರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಕೊರೊನಾ ಹಿನ್ನೆಲೆಯಲ್ಲಿ ರಾಜ್ಯೋತ್ಸವವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ಸಾಧ್ಯವಾಗಿಲ್ಲ. ಆದರೂ ಈ ಮಹಾಮಾರಿಯನ್ನು ದೂರ ಮಾಡಲು ಸಂಘಟಿತ ಯತ್ನ ಅಗತ್ಯ. ಶೀಘ್ರದಲ್ಲೇ ಕೊರೊನಾ ತೆರೆಮರೆಗೆ ಸರಿಯಲಿದೆ’ ಎಂದು ಸಿಎಂ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ‘ಕನ್ನಡ ಭಾಷೆಯಲ್ಲೇ ನಮ್ಮ ಅಸ್ತಿತ್ವ, ಅಸ್ಮಿತೆ ಅಡಗಿದೆ. ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಸರಕಾರ ಕೂಡ ಮುಂದಾಗಿದೆ. ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಉಭಯ ಮಾಧ್ಯಮ ಶಾಲೆ ಆರಂಭಿಸಲಾಗುತ್ತಿದೆ. ಕೊರೊನಾ ಕಾರಣದಿಂದ ಈ ವರ್ಷ 90 ಸಾವಿರ ಮಕ್ಕಳು ಸರಕಾರಿ ಶಾಲೆಗಳಿಗೆ ಸೇರ್ಪಡೆಯಾಗಿದ್ದಾರೆ. ಇದು ಹದಿನಾಲ್ಕು ವರ್ಷಗಳಲ್ಲೇ ದಾಖಲೆಯಾಗಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ RCBಯಿಂದ ಶುಭಾಷಯದ ಗಿಫ್ಟ್!