‘15 ದಿನ ಲಾಕ್ ಡೌನ್ ಮಾಡಿ’- ಹೆಚ್ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ!
‘15 ದಿನ ಲಾಕ್ ಡೌನ್ ಮಾಡಿ’ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಓರ್ವ ಸೋಂಕಿತರಾದ ಮಾಜಿ ಸಿಎಂ ಕುಮಾರಸ್ವಾಮಿ 15 ದಿನ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ. ಇಂದು ಕೊರೊನಾ ತಡೆಗಟ್ಟಲು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸರ್ವಪಕ್ಷದ ನಾಯಕರು ಭಾಗವಹಿಸಿದ್ದಾರೆ. ಸೋಂಕಿಗೆ ಒಳಗಾದ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಕಾನ್ಫರೆನ್ಸ್ ಕಾಲ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದು ಕೊರೊನಾ ತಡೆಗೆ ಚರ್ಚೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡಿದರೆ ಅದರಿಂದಾಗುವ ಸಾದಕ ಬಾದಕಗಳ ಬಗ್ಗೆ ಸರ್ವಪಕ್ಷಗಳ ನಾಯಕರು ಚರ್ಚೆ ಮಾಡುತ್ತಿದ್ದಾರೆ.
ಕಳೆದ ಎರಡು ಮೂರು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಸಾವಿನ ಸಂಖ್ಯಯಲ್ಲೂ ಏರಿಕೆಯಾಗುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರೂ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.
ಹೀಗಾಗಿ ಜನರ ಜೀವ ಉಳಿಸುವುದು ಸರ್ಕಾರದ ಮೊದಲ ಆಧ್ಯತೆ. ಜನರ ಜೀವದ ಜೊತೆ ಚೆಲ್ಲಾಟ ಆಡುವುದು ಬೇಡ ಎಂದು 15 ದಿನ ಲಾಕ್ ಡೌನ್ ಗೆ ಕುಮಾರಸ್ವಾಮಿಯವರು ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಲಾಕ್ ಡೌನ್ ಮಾಡುವ ಮುನ್ನ ಬಡವರಿಗೆ ಪರ್ಯಾಯ ವ್ಯವಸ್ಥೆ ಮಾಡಿ, ಆರ್ಥಿಕ ನೆರವು ನೀಡಿ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ನೈಟ್ ಕರ್ಫ್ಯೂ ನಿಂದ ಪ್ರಯೋಜನ ವಿಲ್ಲ. ಲಾಕ್ ಡೌನ್ ಅನಿವಾರ್ಯವಾಗಿದೆ. ಬೆಂಗಳೂರು ಸೇರಿದಂತೆ ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಿ ಎಂದು ಹೇಳಿದ್ದಾರೆ.