‘ಕನ್ನಡ ಭಾಷೆಯ ಬಗ್ಗೆ ರಾಜಿಯೇ ಇಲ್ಲ’ : ಪೋಷಕರ ಅಭಿಯಾನಕ್ಕೆ ಸುರೇಶ್ ಕುಮಾರ್ ಪ್ರತಿಕ್ರಿಯೆ!
‘ಕನ್ನಡ ಭಾಷೆ ಕಡ್ಡಾಯ ಬೇಡ’ ಪೋಷಕರ ಅಭಿಯಾನಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಕನ್ನಡ ಭಾಷೆಯ ಶಾಲೆಗಳಲ್ಲಿ ಕಡ್ಡಾಯ. ಇದರ ಬಗ್ಗೆ ಯಾವುದೇ ರಾಜಿಯೂ ಇಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್, ಸುರೇಶ್ ಕುಮಾರ್ ಹೇಳಿದ್ದಾರೆ.
ಕೆಲವು ಪೋಷಕರ ಪ್ರಕಾರ, ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಕಡ್ಡಾಯ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಉದ್ಯೋಗ ಸಂಬಂಧ ಒಂದೊಂದು ರಾಜ್ಯಗಳಿಗೆ ತೆರಳಬೇಕಾಗುತ್ತದೆ. ಒಂದೊಂದು ರಾಜ್ಯದಿಂದ ವಿದ್ಯಾರ್ಥಿಗಳು ಓದಲು ಬರುತ್ತಾರೆ. ಹೀಗಾಗಿ ಎಲ್ಲೋ ಓದಿ ನಂತರ ಇಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಈ ಕಾನೂನಿನಿಂದ ಸಮಸ್ಯೆಯಾಗುತ್ತದೆ ಎನ್ನುವುದು ಪೋಷಕರ ಅಭಿಪ್ರಾಯ.
5ನೇ ತರಗತಿವರೆಗೂ ಕನ್ನಡ ಬೋಧನೆಗೆ ನಮ್ಮ ಅಡ್ಡಿಯಿಲ್ಲ. ಆದರೆ 5 ರಿಂದ 10ನೇ ತರಗತಿವರೆಗೆ ಕಡ್ಡಾಯ ಮಾಡಿರುವುದು ಸರಿಯಲ್ಲ ಎಂದು ಅಭಿಯಾನ ಆರಂಭಿಸಿದ್ದಾರೆ.
ಈ ಅಭಿಯಾನದ ವಿರುದ್ಧ ಕನ್ನಡ ಪ್ರಾಧಿಕಾರ ಅಧ್ಯಕ್ಷ ಟಿಎಸ್ ನಾಗಾಭರಣ ಸಿಟ್ಟಾಗಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ. ಇಂತಹ ಅಭಿಯಾನದ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.