ವಿಶ್ವನಾಥ್ಗೆ ಕೃತಜ್ಞತೆ ಇಲ್ಲ; ಅದಕ್ಕೆ ಬಿಎಸ್ವೈ ಕೂಡ ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ ವ್ಯಂಗ್ಯ
ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ ಯಡಿಯೂರಪ್ಪ ಅವರೂ ಕೂಡ ಹೆಚ್. ವಿಶ್ವನಾಥ್ರನ್ನು ಮಂತ್ರಿ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಳ್ಳಿಹಕ್ಕಿ ವಿರುದ್ದ ವ್ಯಂಗ್ಯವಾಡಿದ್ದಾರೆ.
“ವಿಶ್ವನಾಥ್ಗೆ ಅವರಿಗೆ ಲೋಕಸಭೆಗೆ ಟಿಕೆಟ್ ಕೊಡಿಸಿದ್ದು, 2008 ರಲ್ಲಿ ವಿಧಾನಸಭೆಗೆ ಟಿಕೆಟ್ ಕೊಡಿಸಿದ್ದು ಯಾರು ಎಂಬುದನ್ನು ನೆನಪು ಮಾಡಿಕೊಂಡು ಹೇಳಲಿ, ಆ ಮೇಲೆ ನನ್ನ ವಿರುದ್ಧ ಮಾತನಾಡಲಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಸುಪ್ರೀಂಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ” ಎಂದು ಹೇಳಿದ್ದಾರೆ.
ಹೆಚ್. ವಿಶ್ವನಾಥ್ ಅವರು ತಮಗೆ ಲೋಕಸಭೆಗೆ ಟಿಕೆಟ್ ಕೊಡಿಸಿದ್ದು, 2008ರಲ್ಲಿ ವಿಧಾನಸಭೆಗೆ ಟಿಕೆಟ್ ಕೊಡಿಸಿದ್ದು ಯಾರು ಎಂಬುದನ್ನು ನೆನಪು ಮಾಡಿಕೊಂಡು ಹೇಳಲಿ, ಆ ಮೇಲೆ ನನ್ನ ವಿರುದ್ಧ ಮಾತನಾಡಲಿ. ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ @BSYBJP ಅವರೂ ಇವರನ್ನು ಮಂತ್ರಿ ಮಾಡಿಲ್ಲ. 1/6#Mysuru
— Siddaramaiah (@siddaramaiah) January 13, 2021
“ಕಳೆದ 48 ದಿನಗಳಲ್ಲಿ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ” ಎಂದು ಟ್ವಿಟ್ಟರ್ನಲ್ಲಿ ಆಪಾದಿಸಿದ್ದಾರೆ.
’ವಿಶ್ವ ಮಾನವರಾಗುವುದೆಂದರೆ ಪ್ರತಿ ವ್ಯಕ್ತಿಯನ್ನು ಅವರಿದ್ದಂತೆ ಒಪ್ಪಿಕೊಳ್ಳುವುದು’
“ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ವರ್ಷ ಪೂರ್ತಿ ಮುಖ್ಯಮಂತ್ರಿಯಾಗಿದ್ದಾರಾ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕೃತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು. 5/6#Mysuru
— Siddaramaiah (@siddaramaiah) January 13, 2021
“ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಎಂದೂ ಹೇಳುತ್ತಾರೆ, ಇನ್ನೊಂದೆಡೆ ಕುರಿ, ಕೊಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಆಹಾರ, ಸಂಸ್ಕೃತಿ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು” ಎಂದು ಸಿದ್ದರಾಮಯ್ಯ ಬಿಜೆಪಿಗೆ ಬಹುತ್ವದ ಪಾಠ ಮಾಡಿದ್ದಾರೆ.
“ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜನರ ದುಡ್ಡು ತಿಂದು ಜೈಲಿಗೆ ಹೋಗುವುದೆ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ” ಎಂದು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ಮಂತ್ರಿಗಿರಿಗಾಗಿ ಕಣ್ಣೀರಿಟ್ಟ ಶಾಸಕ ರೇಣುಕಾಚಾರ್ಯ : ಬಿಜೆಪಿಯಲ್ಲಿ ಭುಗಿಲೆದ್ದ ಅಸಮಧಾನ!